ಶ್ಲೋಕ – 21
ವೇದಾವಿನಾಶಿನಂ ನಿತ್ಯಂ ಯ ಏನಮಜಮವ್ಯಯಮ್ ।
ಕಥಂ ಸ ಪುರುಷಃ ಪಾರ್ಥ ಕಂ ಘಾತಯತಿ ಹಂತಿ ಕಮ್ ॥೨೧॥
ವೇದ ಅವಿನಾಶಿನಮ್ ನಿತ್ಯಮ್ ಯಃ ಏನಮ್ ಅಜಮ್ ಅವ್ಯಯಮ್ ಕಥಮ್ ಸಃ ಪುರುಷಃ ಪಾರ್ಥ ಕಮ್ ಘಾತಯತಿ ಹಂತಿ ಕಮ್—ಓ ಪಾರ್ಥ, ಹುಟ್ಟು-ಸಾವುಗಳಿರದ, ಮಾರ್ಪಡದ, ಏತರಿಂದಲೂ ಅಳಿಯದ ಈ ಜೀವನನ್ನು[ಶರೀರದಿಂದಲೂ ಅಳಿವಿರದ ಭಗವಂತನನ್ನು] ಬಲ್ಲ ಜೀವಿ, ಯಾರನ್ನು ಹೇಗೆ ಕೊಲ್ಲಿಸುವುದು ? ಯಾರನ್ನು ಹೇಗೆ ಕೊಲ್ಲುವುದು?
ದೋಷ ಸಂಬಂಧವಿಲ್ಲದ, ನಿತ್ಯವಾದ, ಎಂದೂ ಬದಲಾಗದ ಜೀವ ಸ್ವರೂಪವನ್ನು ಯಾರು ತಿಳಿಯುತ್ತಾರೋ ಅಂತಹ ಮಾನವನು ಯಾರನ್ನು ಕೊಲ್ಲುವುದು ಅಥವಾ ಕೊಲ್ಲಿಸುವುದು ಹೇಗೆ ಸಾಧ್ಯ? ಸ್ವರೂಪತಃ ಜೀವನಿಗೆ ನಾಶವಿಲ್ಲ ಎಂದು ತಿಳಿದಾಗ, ಸ್ಥೂಲ ಪ್ರಪಂಚದಲ್ಲಿ ಹುಟ್ಟು-ಸಾವು ಭಗವಂತನ ಇಚ್ಚೆಯಂತೆ ನಡೆಯುತ್ತಿದೆ ಎಂದು ತಿಳಿದ ಮೇಲೆ, ಯಾರು ಯಾರನ್ನು ಕೊಲ್ಲುವುದು ಅಥವಾ ಕೊಲ್ಲಿಸುವುದು? ಹುಟ್ಟು-ಸಾವಿನ ಹಿಂದಿರುವ ಭಗವತ್ ಶಕ್ತಿಯನ್ನು ನಾವು ಅರಿತುಕೊಳ್ಳಬೇಕು ಅಷ್ಟೆ.
ಜೀವಕ್ಕೆ ಅಳಿವಿಲ್ಲ, ಅದಕ್ಕೆ ಹುಟ್ಟು-ಸಾವು ಎನ್ನುವುದಿಲ್ಲ. ಹಾಗಿದ್ದರೆ ನಾವು ಪ್ರಾಪಂಚಿಕವಾಗಿ ಕಾಣುವ ಹುಟ್ಟು-ಸಾವನ್ನು ಅರ್ಥ ಮಾಡಿಕೊಳ್ಳುವುದು ಹೇಗೆ? ಈ ಪ್ರಶ್ನೆಗೆ ಕೃಷ್ಣ ಮುಂದಿನ ಶ್ಲೋಕದಲ್ಲಿ ಉತ್ತರಿಸಿದ್ದಾನೆ.