ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 02

ಶ್ಲೋಕ – 3

ಕ್ಲೈಬ್ಯಂ ಮಾಸ್ಮಗಮಃ ಪಾರ್ಥ ನೈತತ್ ತ್ವಯ್ಯುಪಪದ್ಯತೇ ।
ಕ್ಷುದ್ರಂ ಹೃದಯದೌರ್ಬಲ್ಯಂ ತ್ಯಕ್ತ್ವೋತ್ತಿಷ್ಠ ಪರಂತಪ ॥೩॥

ಕ್ಲೈಬ್ಯಮ್ ಮಾ ಸ್ಮಗಮಃ ಪಾರ್ಥ ನ ಏತತ್ ತ್ವಯಿ ಉಪಪದ್ಯತೇ ಕ್ಷುದ್ರಮ್ ಹೃದಯ ದೌರ್ಬಲ್ಯಮ್ ತ್ಯಕ್ತ್ವಾ ಉತ್ತಿಷ್ಠ ಪರಮ್ ತಪ -ಪಾರ್ಥ, ಹೇಡಿಯಾಗಬೇಡ, ನಿನ್ನಲ್ಲಿ ಇದು ತರವಲ್ಲ. ಅರಿಗಳ ಎದೆಗೆಡಿಸುವ ವೀರನೆ, ಕೀಳರಿಮೆಯ ಎದೆಗೇಡಿತನವನ್ನು ತೊರೆದು ಎದ್ದು ನಿಲ್ಲು.

“ನಪುಂಸಕನಂತೆ ಮಾತನಾಡಬೇಡ. ಅರ್ಜುನನಲ್ಲಿ ಇಂತಹ ಹೇಡಿತನವನ್ನು ನಾನು ನಿರೀಕ್ಷಿಸಿರಲಿಲ್ಲ. ಇಂತಹ ಕ್ಷುದ್ರ ಮಾನಸಿಕ ದೌರ್ಬಲ್ಯವನ್ನು ತೊಡೆದುಹಾಕಿ, ವೀರನಾಗಿ ಅನ್ಯಾಯದ ವಿರುದ್ಧ ಹೋರಾಡು” ಎಂದು ಹೇಳಿ ಕೃಷ್ಣ, ಅರ್ಜುನನಿಗೆ ದಿಗ್ಬ್ರಾಂತಿಗೊಳಿಸಿ ಚಿಕೆತ್ಸೆ(Shock Treatment) ನೀಡಿದ್ದಾನೆ.
ಕೃಷ್ಣ ಏಕೆ ಹೀಗೆ ಹೇಳಿದ? ಆತ ಯುದ್ಧ ಹಾಗು ರಕ್ತಪಾತವನ್ನು ಬಯಸಿದ್ದನೇ ? ಇತ್ಯಾದಿ ಪ್ರಶ್ನೆ ನಮ್ಮಲ್ಲಿ ಮೂಡುವುದು ಸಾಮಾನ್ಯ. ಇಲ್ಲಿ ಸೂಕ್ಷ್ಮವಾಗಿ ನೋಡಿದರೆ: ಯುದ್ಧವಾದರೆ ಸಾಮಾಜಿಕವಾಗಿ ಏನೇನು ತೊಂದರೆ ಆಗಬಹುದು ಎಂದು ಅರ್ಜುನ ಹೇಳಿದ್ದನೋ, ಅದಕ್ಕಿಂತ ಹತ್ತುಪಟ್ಟು ಅನ್ಯಾಯ ಯುದ್ಧವಾಗದೇ ಇದ್ದಿದ್ದರೆ ಆಗುತ್ತಿತ್ತು. ದುರ್ಯೋಧನ ಆ ಕಾಲದ ಮಹಾ ಲೋಕಕಂಟಕ. ತುಂಬಿದ ಸಭೆಯಲ್ಲಿ ತನ್ನ ಸ್ವಂತ ಅತ್ತಿಗೆಯ ಮಾನಭಂಗಕ್ಕೆ ಕೈ ಹಾಕಿದ ಆತ, ಅಧಿಕಾರದ ಗದ್ದುಗೆ ಏರಿದ್ದರೆ ಸಮಾಜದ ಪರಿಸ್ಥಿತಿ ಏನಾಗುತ್ತಿತ್ತು ಯೋಚಿಸಿ. ಇಲ್ಲಿ ಕೃಷ್ಣನ ಧೋರಣೆ ಈ ದೇಶದ ನಾಯಕತ್ವ ಮುಂದೆ ಯಾರ ಕೈ ಸೇರಬೇಕು ಎನ್ನುವುದೇ ಹೊರತು ಬಂಧು ಪ್ರೇಮವಲ್ಲ. ಗೆಲ್ಲುವುದು ಸೋಲುವುದಕ್ಕಿಂತ, ಅನ್ಯಾಯದ ವಿರುದ್ಧ ದ್ವನಿ ಎತ್ತುವುದು ಮುಖ್ಯ. ಅನ್ಯಾಯದ ವಿರುದ್ಧ ಹೋರಾಡಿ ಸತ್ತರೂ ತೊಂದರೆ ಇಲ್ಲ, ಆದರೆ ಅದರ ವಿರುದ್ಧ ಸೆಟೆದು ನಿಲ್ಲಬೇಕು ಎನ್ನುವುದು ಕೃಷ್ಣನ ಸಂದೇಶ. ಶ್ರೀ ಕೃಷ್ಣ ಮಹಾಭಾರತದ ಮುಖೇನ ನಮಗೆ ಧರ್ಮದ ಒಂದು ಹೊಸ ಸಿದ್ಧಾಂತವನ್ನು ಕೊಟ್ಟ. ಮಹಾಭಾರತಕ್ಕೆ ಮೊದಲು ಇದ್ದ ಧರ್ಮದ ಕಲ್ಪನೆಯೇ ಬೇರೆ. ಉದಾಹರಣೆಗೆ ಸತ್ಯ ಹೇಳುವುದು: ಇದ್ದದ್ದನ್ನು ಇದ್ದಂತೆ ಹೇಳುವುದು ಸತ್ಯ. ಆದರೆ ಕೃಷ್ಣನ ಪ್ರಕಾರ-ಯಾವ ಸುಳ್ಳು ಹೇಳುವುದರಿಂದ ಸಮಾಜಕ್ಕೆ ಹಿತವಾಗುತ್ತದೋ ಅದು ಸತ್ಯ; ಯಾವ ಸತ್ಯ ಹೇಳುವುದರಿಂದ ಸಮಾಜಕ್ಕೆ ಕೆಡುಕಾಗುತ್ತದೋ ಅದು ಸುಳ್ಳು. ಇನ್ನು ಹಿಂಸೆ: ಒಂದು ಹಿಂಸೆಯಿಂದ ಅನೇಕ ಅಹಿಂಸೆ ಸಾಧ್ಯವಾದರೆ ಅದು ಅಹಿಂಸೆ. ಉದಾಹರಣೆಗೆ ನರಭಕ್ಷಕ ಹುಲಿಯೊಂದು ಪ್ರತಿದಿನ ಊರಿಗೆ ದಾಳಿಯಿಟ್ಟು ಒಬ್ಬೊಬ್ಬರನ್ನೇ ತಿನ್ನುತ್ತಿದ್ದರೆ, ಅದನ್ನು ಕೊಲ್ಲುವುದು ಪ್ರಾಣಿ ಹಿಂಸೆ ಅಲ್ಲ. ಒಂದು ಯುದ್ಧದಿಂದ ತಲತಲಾಂತರದವರೆಗೆ ಅಹಿಂಸೆ ಸ್ಥಾಪನೆ ಸಾಧ್ಯವಾದರೆ ಯುದ್ಧಮಾಡುವುದರಲ್ಲಿ ತಪ್ಪಿಲ್ಲ. ಯಾವುದರಿಂದ ಸಜ್ಜನಿಕೆಯ ರಕ್ಷಣೆ ಆಗುತ್ತದೋ ಅದು ಸತ್ಯ. ಧರ್ಮಕ್ಕೆ ಭಾವ ಮುಖ್ಯ. ಯಾವ ಕಾರಣಕ್ಕಾಗಿ ಹೋರಾಡುತ್ತೇವೆ, ಅದರ ಹಿಂದೆ ಇರುವ ಉದ್ದೇಶ ಏನು ಎನ್ನುವುದು ಮುಖ್ಯ.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

Leave a Reply

Your email address will not be published. Required fields are marked *