ಶ್ಲೋಕ – 36
ಅಪಿ ಚೇದಸಿ ಪಾಪೇಭ್ಯಃ ಸರ್ವೇಭ್ಯಃ ಪಾಪಕೃತ್ತಮಃ ।
ಸರ್ವಂ ಜ್ಞಾನಪ್ಲವೇನೈವ ವೃಜಿನಂ ಸಂತರಿಷ್ಯಸಿ ॥೩೬॥
ಅಪಿ ಚೇತ್ ಅಸಿ ಪಾಪೇಭ್ಯಃ ಸರ್ವೇಭ್ಯಃ ಪಾಪ ಕೃತ್ ತಮಃ
ಸರ್ವಮ್ ಜ್ಞಾನ ಪ್ಲವೇನ ಏವ ವೃಜಿನಮ್ ಸಂತರಿಷ್ಯಸಿ-ನೀನು ಎಲ್ಲಾ ಪಾಪಿಗಳಿಗಿಂತಲೂ ಹಿರಿಯ ಪಾಪಿಯಾಗಿದ್ದರೂ ಸರಿಯೇ, ಎಲ್ಲ ಪಾತಕಗಳನ್ನೂ ತಿಳಿವಿನ ದೋಣಿಯಿಂದ ದಾಟಬಲ್ಲೆ.
“ನೀನು ನಿನ್ನ ಕಾಲದಲ್ಲಿನ ಸರ್ವಶ್ರೇಷ್ಠ ಪಾಪಿಯಾಗಿದ್ದರೂ ಕೂಡಾ, ಒಮ್ಮೆ ನಿನಗೆ ಭಗವಂತನ ಅರಿವು ಮೂಡಿದರೆ ನೀನು ಗೆದ್ದಂತೆ” ಎನ್ನುತ್ತಾನೆ ಕೃಷ್ಣ. ಏಕೆಂದರೆ ತಿಳುವಳಿಕೆ ಬಂದ ಮೇಲೆ ಜ್ಞಾನದ ಮಾರ್ಗದಲ್ಲಿ ಸಾಗಿದರೆ ಹಿಂದಿನ ಯಾವ ಪಾಪವೂ ನಿಲ್ಲುವುದಿಲ್ಲ. ಜ್ಞಾನವೆನ್ನುವುದು ಪಾಪದ ಕಡಲಿನಲ್ಲಿ ದೋಣಿಯಂತೆ. ಅದು ನಮ್ಮನ್ನು ದಡ ಸೇರಿಸಬಲ್ಲದು. ಪಾಪದ ಕಡಲನ್ನು ದಾಟಲು ಇರುವ ಒಂದೇ ಒಂದು ಸಾಧನ ಜ್ಞಾನ. ಇಂತಹ ದೊಡ್ಡ ಭರವಸೆಯನ್ನು ಕೃಷ್ಣ ಕೊಟ್ಟಿದ್ದಾನೆ. ಆದ್ದರಿಂದ ನಾವೆಲ್ಲರೂ ಇಂದೇ ಈ ಕ್ಷಣದಿಂದ ಜ್ಞಾನ ಮಾರ್ಗದಲ್ಲಿ ಸಾಗುವ ಸಂಕಲ್ಪ ತೊಟ್ಟು ಮುಂದುವರಿಯೋಣ- ಏಕೆಂದರೆ ನಾಳೆ ಎಂದರೆ ಆ ನಾಳೆ ನಮ್ಮ ಪಾಲಿಗೆ ಬಾರದೆ ಇರಬಹುದು! Yesterday was history, tomorrow is a mystery, today is God’s gift, that’s why we call it ‘the present’ .
ಜ್ಞಾನ ಮಾರ್ಗವನ್ನು ಹಿಡಿದ ಒಬ್ಬ ಪಾಪಿಯ ಪಾಪಕರ್ಮವೇನಾಗುತ್ತದೆ ಎನ್ನುವುದಕ್ಕೆ ಮುಂದಿನ ಶ್ಲೋಕದಲ್ಲಿ ಕೃಷ್ಣ ವಿವರಣೆಯನ್ನು ಕೊಟ್ಟಿದ್ದಾನೆ.